ಮೂಡುಬಿದಿರೆ: ತಾಲೂಕು ಆಡಳಿತ ಸೌಧದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ತಾಲೂಕು ತಹಸೀಲ್ದಾರ್ ಶ್ರೀಧರ್ ಎಸ್. ಮುಂದಲಮನಿ, ಧ್ವಜಾರೋಹಣ ನೆರವೇರಿಸಿದರು.

ಅಧ್ಯಕ್ಷತೆ ವಹಿಸಿ ಗೌರವ ರಕ್ಷೆ ಸ್ವೀಕರಿಸಿದ ಕ್ಷೇತ್ರದ ಶಾಸಕ ಉಮಾನಾಥ ಎ. ಕೋಟ್ಯಾನ್ ಮಾತನಾಡಿ, ಮೂಡುಬಿದಿರೆಯಲ್ಲಿ ರೂ.4.50 ಕೋಟಿ ವೆಚ್ಚದಲ್ಲಿ ಪ್ರವಾಸಿ ಮಂದಿರ ನಿರ್ಮಿಸಲಾಗುತ್ತಿದ್ದು, ತಾಲೂಕು ಪಂಚಾಯಿತಿ ಕಟ್ಟಡದ ನಿರ್ಮಾಣ ಪ್ರಗತಿಯಲ್ಲಿದೆ. ರೂ.77 ಕೋಟಿ ವೆಚ್ಚದಲ್ಲಿ ಅಮೃತ ಯೋಜನೆಯಡಿ ಮನೆಮನೆಗೆ ಕುಡಿಯುವ ನೀರು ಒದಗಿಸುವ ಕಾಮಗಾರಿ ಅಂತಿಮ ಹಂತದಲ್ಲಿದೆ. ಮೂಡುಬಿದಿರೆಯನ್ನು ಜಿಲ್ಲೆಯಲ್ಲಿ ಮಾದರಿ ತಾಲೂಕಾಗಿ ರೂಪಿಸಲಾಗುವುದು ಎಂದರು. ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಗಳ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

‘ಭೂಮಿ ನಮ್ಮ ನೀರು’ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಬೆಳುವಾಯಿ ಮರಿಯಂ ನಿಕೇತನ್‌ನ ನಿಲೀಮಾ ಜೆನ್ ವಿನ್ ಫೆರ್ನಾಂಡಿಸ್, ಸಿಮ್ರಾ ಫಾತಿಮಾ ಹಾಗೂ ಮೂಡುಬಿದಿರೆ ಜೈನ ಪ್ರೌಢಶಾಲೆಯ ಸಮರ್ಥ್ ಆರ್. ಆಚಾರ್ಯ ಅವರಿಗೆ ಬಹುಮಾನ ವಿತರಿಸಲಾಯಿತು.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಪಿ., ಪೊಲೀಸ್ ನಿರೀಕ್ಷಕ ರಾಜೇಂದ್ರ ಬಿ., ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಕ್ಷಪ್ಪ, ವಲಯ ಅರಣ್ಯಾಧಿಕಾರಿ ಕಿರಣ್ ಕುಮಾರ್, ಪುರಸಭಾ ಮುಖ್ಯಾಧಿಕಾರಿ ಇಂದು ಎಂ., ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಕನ್ನಡ ಜಾಗೃತಿ ಸಮಿತಿ ಜಿಲ್ಲಾ ಸದಸ್ಯ ರಾಜೇಶ್ ಕಡಲಕೆರೆ, ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಪ್ರಭಾರ ವೈದ್ಯಾಧಿಕಾರಿ ಡಾ. ಅಕ್ಷತಾ ನಾಯಕ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದೊರೆಸ್ವಾಮಿ ಹಾಗೂ ನಿವೃತ್ತ ಸೈನಿಕರು ಉಪಸ್ಥಿತರಿದ್ದರು. ಪೊಲೀಸ್, ಗೃಹರಕ್ಷಕ, ಎನ್‌ಸಿಸಿ, ಎನ್‌ಎಸ್‌ಎಸ್ ಹಾಗೂ ವಿವಿಧ ಶಾಲಾ-ಕಾಲೇಜು ತಂಡಗಳಿಂದ ಪಥಸಂಚಲನ ನಡೆಯಿತು. ಉಪತಹಸೀಲ್ದಾರ್ ಕೆ. ರಾಮ ಸ್ವಾಗತಿಸಿ ಪ್ರಸ್ತಾವನೆಗೈದರು. ಗ್ರಾಮಾಧಿಕಾರಿ ಅರ್ಜುನ್ ಸಜ್ಜನ್ ಕಾರ್ಯಕ್ರಮ ನಿರೂಪಿಸಿದರು.