ಮೂಡುಬಿದಿರೆ: ಕಲ್ಯಾಣಪುರದಲ್ಲಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕ ಡಾ. ಗಣನಾಥ್ ಶೆಟ್ಟಿ, ಸ್ವಾತಂತ್ರ್ಯ ಕೇವಲ ಹಕ್ಕು ಮಾತ್ರವಲ್ಲ, ಜವಾಬ್ದಾರಿಯೂ ಆಗಿದೆ. ಹಿರಿಯರು ತ್ಯಾಗ ಬಲಿದಾನದಿಂದ ದೊರಕಿಸಿಕೊಟ್ಟ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳದೆ ಭಾರತೀಯ ಪ್ರಜೆಗಳಾದ ನಾವು ಸದ್ಬಳಕೆ ಮಾಡಿಕೊಂಡು ದೇಶದ ಪ್ರಗತಿಗೆ ಸಹಕರಿಸಬೇಕು ಎಂದು ಕರೆ ನೀಡಿದರು. ತ್ರಿಶಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಹೆಗಡೆ ಮಾತನಾಡಿ, ರಾಷ್ಟ್ರಗೀತೆ, ರಾಷ್ಟ್ರಧ್ವಜ, ರಾಷ್ಟ್ರಲಾಂಛನ ಹಾಗೂ ದೇಶದ ಸಂವಿಧಾನವನ್ನು ಗೌರವಿಸುವುದು ನಮ್ಮ ಕರ್ತವ್ಯ. ಭಾರತ ಇಂದು ಎಲ್ಲ ಕ್ಷೇತ್ರಗಳಲ್ಲೂ ವಿಶ್ವ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದೆ. ದೇಶದ ಭವಿಷ್ಯದ ರೂವಾರಿಗಳಾಗಿರುವ ಯುವಜನತೆ ದೇಶದ ಪ್ರಗತಿಗೆ ಸಹಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ತ್ರಿಶಾ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿ ಕಾರ್ತಿಕ್ ಭಂಡಾರಿ ಉಪಸ್ಥಿತರಿದ್ದರು. ಆಂಗ್ಲ ಭಾಷಾ ಉಪನ್ಯಾಸಕಿ ಭವ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಬಳಿಕ ಗೋಲ್ಡನ್ ಟ್ರ್ಯಾಕ್ಸ್ ಬ್ರಹ್ಮಾವರದ ಲಿಂಗಪ್ಪ ಮತ್ತು ತಂಡದವರಿಂದ ‘ಕ್ರಿಯೇಟಿವ್ ಸವಿಗಾನ’ ಶೀರ್ಷಿಕೆಯಡಿ ದೇಶಭಕ್ತಿ ಗೀತೆ ಹಾಗೂ ಸದಭಿರುಚಿಯ ಗೀತಗಾಯನ ನಡೆಯಿತು. ಕಾರ್ಯಕ್ರಮಗಳಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.