ಮೂಡುಬಿದಿರೆ: ಮಂಗಳೂರು-ಮೂಡುಬಿದಿರೆ-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ ಪ್ರದೇಶದಲ್ಲಿ ಪದೇ ಪದೇ ಸಂಭವಿಸುತ್ತಿರುವ ರಸ್ತೆ ಅಪಘಾತಗಳ ತಡೆಗೆ ಸಂಬಂಧಿಸಿದಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಮಕ್ಷಮದಲ್ಲಿ ಸಾಯಂಕಾಲ ಮಹತ್ವದ ಸಭೆ ನಡೆಯಿತು.
ಈ ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಹೆದ್ದಾರಿ ಕಾಮಗಾರಿ ನಡೆಸುತ್ತಿರುವ ಕಂಪನಿಯ ಪ್ರಮುಖರು ಭಾಗವಹಿಸಿದ್ದರು.
ಬನ್ನಡ್ಕ ಭಾಗದಲ್ಲಿ ಅಪಘಾತಗಳು ಸಂಭವಿಸಲು ಕಾರಣವಾದ ತಾಂತ್ರಿಕ ಅಂಶಗಳ ಕುರಿತು ಸ್ಥಳೀಯ ಪ್ರಮುಖರೊಂದಿಗೆ ಚರ್ಚಿಸಿದ ಸಂಸದರು, ಕೂಡಲೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಭಾಗದಲ್ಲಿ ಸಂಚಾರ ಸುಗಮಗೊಳಿಸಲು ಸರ್ವಿಸ್ ರಸ್ತೆ ನಿರ್ಮಾಣದ ಅಗತ್ಯವಿದ್ದು, ಈ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಸಭೆಯಲ್ಲಿ ಸ್ಥಳೀಯ ಪ್ರಮುಖರಾದ ಸೂರಜ್ ಜೈನ್ ಮಾರ್ನಾಡು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶಾಂತಿಪ್ರಸಾದ್ ಹೆಗ್ಡೆ ಪ್ರೀತಮ್ ಮಾರ್ನಾಡು, ಪ್ರವೀಣ್ ಭಂಡಾರಿ, ರವಿರಾಜ್ ಪುತ್ತೂರು, ಉಪಸ್ಥಿತರಿದ್ದು, ಹೆದ್ದಾರಿ ಸಮಸ್ಯೆಗಳ ಬಗ್ಗೆ ಸಂಸದರ ಗಮನ ಸೆಳೆದರು. ಸಂಸದರ ಈ ತ್ವರಿತ ಸ್ಪಂದನೆಗೆ ಮೆಚ್ಚುಗೆ ವ್ಯಕ್ತವಾಯಿತು.