ಮೂಡುಬಿದಿರೆ: ಕಾರ್ಕಳ ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕದಲ್ಲಿ ಕಲ್ಲು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಲಾರಿಯಲ್ಲಿದ್ದ ಕಲ್ಲುಗಳು ರಸ್ತೆಯುದ್ದಕ್ಕೂ ಹರಡಿಕೊಂಡಿದ್ದು, ಕೆಲಕಾಲ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ನಿರಂತರವಾಗಿ ಸರಣಿ ಅಪಘಾತಗಳು ಸಂಭವಿಸುತ್ತಲೇ ಇವೆ. ಈ ರಸ್ತೆ ಅಪಘಾತಗಳ ತಾಣವಾಗಿ ಮಾರ್ಪಡುತ್ತಿದ್ದರೂ ಸಂಬಂಧಪಟ್ಟವರು ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಈ ಪ್ರದೇಶದಲ್ಲಿ ಪದೇ ಪದೇ ನಡೆಯುತ್ತಿರುವ ಅಪಘಾತಗಳ ಬಗ್ಗೆ ಸ್ಥಳೀಯರು ಹಾಗೂ ವಾಹನ ಸವಾರರು ಸ್ಥಳೀಯ ಶಾಸಕರು ಮತ್ತು ಸಂಸದರ ಗಮನಕ್ಕೆ ತಂದು ರಸ್ತೆ ದುರಸ್ತಿಗೆ ಆಗ್ರಹಿಸಿದ್ದರು. ಆದರೂ ಈ ಅಪಾಯಕಾರಿ ವಲಯದಲ್ಲಿ ಮತ್ತೊಮ್ಮೆ ಅಪಘಾತ ಸಂಭವಿಸಿರುವುದು ವಾಹನ ಸವಾರರನ್ನು ತೀವ್ರ ಆತಂಕಕ್ಕೆ ಈಡುಮಾಡಿದೆ. ಇನ್ನಾದರೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಂಡು ಈ ರಸ್ತೆಯ ದೋಷಗಳನ್ನು ಸರಿಪಡಿಸಿ, ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸ್ಥಳೀಯರು ವಿನಂತಿಸಿದರು.