ಮೂಡುಬಿದಿರೆ: ಬನ್ನಡ್ಕ ರಸ್ತೆಯಲ್ಲಿ ನಿರಂತರವಾಗಿ ಸಂಭವಿಸುತ್ತಿರುವ ಸರಣಿ ಅಪಘಾತಗಳನ್ನು ಖಂಡಿಸಿ ಮತ್ತು ತಕ್ಷಣವೇ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ಮೇ 31ರಂದು ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ. ನಾಗರಿಕ ವೇದಿಕೆ ಬನ್ನಡ್ಕ ನೇತೃತ್ವದಲ್ಲಿ ಈ ಹೋರಾಟ ನಡೆಯಲಿದೆ. ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಈ ರಸ್ತೆಯಲ್ಲಿ ಒಟ್ಟು 25 ಭೀಕರ ಅಪಘಾತಗಳು ಸಂಭವಿಸಿದ್ದು, 9 ಮಂದಿ ಜೀವ ಕಳೆದುಕೊಂಡಿದ್ದಾರೆ. ಹಲವಾರು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಇನ್ನೊಂದು ಪ್ರಾಣ ಹೋಗುವ ಮೊದಲೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ನಿರ್ಲಕ್ಷ್ಯ ಬಿಟ್ಟು ಸುರಕ್ಷತೆ ನೀಡಿ, ಜನರ ಜೀವ ಅತ್ಯಂತ ಮೌಲ್ಯಯುತವಾದುದು ಎಂಬ ಘೋಷಣೆಗಳೊಂದಿಗೆ ಬನ್ನಡ್ಕ ದೈವಸ್ಥಾನದ ಬಳಿ ಪ್ರತಿಭಟನೆಯನ್ನು ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.