ಮೂಡುಬಿದಿರೆ: ಇಲ್ಲಿನ ಕಲ್ಲಬೆಟ್ಟುವಿನ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಶಿಕ್ಷಣ ತಜ್ಞ ಪುಷ್ಪರಾಜ್ ಬಿ. ಅಧಿಕಾರ ಸ್ವೀಕರಿಸಿದ್ದಾರೆ. ಪ್ರಸ್ತುತ ಇದೇ ಸಂಸ್ಥೆಯಲ್ಲಿ ಶೈಕ್ಷಣಿಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪುಷ್ಪರಾಜ್ ಬಿ. ವಿವಿಧ ಶಿಕ್ಷಣ ಸಂಸ್ಥೆಗಳ ವಿವಿಧ ಹುದ್ದೆಗಳಲ್ಲಿ 30 ವರ್ಷಗಳ ಸುದೀರ್ಘ ಬೋಧನಾ ಮತ್ತು ಆಡಳಿತಾತ್ಮಕ ಅನುಭವ ಹೊಂದಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಆಪ್ತಸಮಾಲೋಚಕರು, ತರಬೇತುದಾರರು ಮತ್ತು ಸಂಪನ್ಮೂಲ ವ್ಯಕ್ತಿಯಾಗಿ ಗುರುತಿಸಿಕೊಂಡಿರುವ ಇವರು, ತಮ್ಮ ವೃತ್ತಿಜೀವನದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಆಧುನಿಕ ಕಲಿಕಾ ವಿಧಾನಗಳ ಕುರಿತು ತರಬೇತಿ ನೀಡಿದ್ದಾರೆ. ಇದರೊಂದಿಗೆ ರಾಜ್ಯದಾದ್ಯಂತ ವಿವಿಧ ಕಾಲೇಜುಗಳ 20,000 ಕ್ಕೂ ಹೆಚ್ಚು ಶಿಕ್ಷಕರಿಗೆ ತರಗತಿ ನಿರ್ವಹಣೆ ಕುರಿತು ವಿಶೇಷ ಕಾರ್ಯಾಗಾರ ಹಾಗೂ ತರಬೇತಿ ನಡೆಸಿಕೊಟ್ಟಿದ್ದಾರೆ. ಪುಷ್ಪರಾಜ್ ಬಿ. ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಹಾಗೂ ಕಾರ್ಯದರ್ಶಿ ರಶ್ಮಿತಾ ಜೈನ್ ಅಭಿನಂದನೆ ಸಲ್ಲಿಸಿದ್ದಾರೆ. ಇವರ ಸಮರ್ಥ ನಾಯಕತ್ವದಲ್ಲಿ ಕಾಲೇಜು ಶೈಕ್ಷಣಿಕವಾಗಿ ಮತ್ತಷ್ಟು ಉನ್ನತ ಸಾಧನೆ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಂಸ್ಥೆಯ ಆಡಳಿತ ನಿರ್ದೇಶಕ ಸಂಪತ್ ಕುಮಾರ್, ಆಡಳಿತಾಧಿಕಾರಿ ಹರೀಶ್ ಶೆಟ್ಟಿ ಹಾಗೂ ಕಾಲೇಜಿನ ಹಿರಿಯ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು ನೂತನ ಪ್ರಾಂಶುಪಾಲರನ್ನು ಗೌರವಿಸಿ, ಶುಭ ಹಾರೈಸಿದರು.
ಎಕ್ಸಲೆಂಟ್ ಪಿಯು ಕಾಲೇಜಿನ ನೂತನ ಪ್ರಾಂಶುಪಾಲ ಪುಷ್ಪರಾಜ್ ಬಿ. ಅಧಿಕಾರ ಸ್ವೀಕಾರ
ಎಕ್ಸಲೆಂಟ್ ಪಿಯು ಕಾಲೇಜಿನ ನೂತನ ಪ್ರಾಂಶುಪಾಲ ಪುಷ್ಪರಾಜ್ ಬಿ. ಅಧಿಕಾರ ಸ್ವೀಕಾರ