ಮೂಡುಬಿದಿರೆ: ಮಕ್ಕಳಿಗೆ ಬಾಲ್ಯದಲ್ಲಿಯೇ ಬದುಕಿನ ಮೌಲ್ಯಗಳ ಬಗ್ಗೆ ಅರಿವು ಮೂಡಿಸಿ, ಉತ್ತಮ ಶಿಕ್ಷಣ ನೀಡಿದರೆ ಮುಂದೆ ಸಮಾಜವು ಸಾಮರಸ್ಯದಿಂದ ಇರಲು ಸಾಧ್ಯವಾಗುತ್ತದೆ ಎಂದು ಪಾಲಡ್ಕ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಜಗದೀಶ್ ಕೋಟ್ಯಾನ್ ಹೇಳಿದರು. ಕಡಂದಲೆ ವಿದ್ಯಾಗಿರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದ ಹೊಸ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ ಸಮರ್ಥ ಹಾಗೂ ಗುಣಮಟ್ಟದ ಶಿಕ್ಷಣ ಸಿಗುತ್ತದೆ ಎಂಬುದನ್ನು ಪೋಷಕರು ಅರಿಯುವುದು ಮುಖ್ಯವಾಗಿದೆ. ಮಳೆಗಾಲದ ಅವಧಿಯಲ್ಲಿ ಪೋಷಕರು ಮಕ್ಕಳ ಸುರಕ್ಷತೆ ಮತ್ತು ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು. ಮಕ್ಕಳನ್ನು ಧನಾತ್ಮಕ ಚಿಂತನೆಗಳೊಂದಿಗೆ ಸೂಕ್ಷ್ಮತೆಯಿಂದ ಬೆಳೆಸಬೇಕೇ ಹೊರತು, ನಕಾರಾತ್ಮಕವಾಗಿ ಬೆಳೆಸಬಾರದು ಎಂದು ಅವರು ಪೋಷಕರಿಗೆ ಕಿವಿಮಾತು ಹೇಳಿದರು. ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಎಸ್‍ಡಿಎಂಸಿ ಅಧ್ಯಕ್ಷ ಸೀತಾರಾಮ ಸಾಲ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಎಸ್‍ಡಿಎಂಸಿ ಉಪಾಧ್ಯಕ್ಷೆ ಪ್ರಣೀತಾ ಪೂಜಾರಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಗದೀಶ್ ಪೂಜಾರಿ ಪೂಪಾಡಿಕಲ್ಲು, ಮುಖ್ಯ ಶಿಕ್ಷಕಿ ಪ್ರತಿಭಾ ಎಂ.ಪಿ, ಶಿಕ್ಷಕರಾದ ಸತೀಶ್ ಶೆಟ್ಟಿ, ಪೌಲಿನ್ ಪಿಂಟೋ, ಸುಮನಾ ಎಚ್.ಸಿ ಹಾಗೂ ಅಂಗನವಾಡಿ ಕಾರ್ಯಕರ್ತೆ ಬೆನಡಿಕ್ಟಾ ದಾಂತಿಸ್ ಮತ್ತು ಪೋಷಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಪ್ರತಿಭಾ ಎಂ.ಪಿ ಸ್ವಾಗತಿಸಿ, ಶಿಕ್ಷಕ ಸತೀಶ್ ಶೆಟ್ಟಿ ವಂದಿಸಿದರು.