ಮೂಡುಬಿದಿರೆ: ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಎಂಜಿನಿಯರಿಂಗ್ (ಮೈಟ್) ಕಾಲೇಜಿನ ಎನ್.ಎಸ್.ಎಸ್. ವಿಭಾಗ, ಸಿವಿಲ್ ಎಂಜಿನಿಯರಿಂಗ್ ವಿಭಾಗ ಮತ್ತು ಇಗ್ಲಿಟಿಯಾ ವಿಜ್ಞಾನ ವೇದಿಕೆಯ ಸಹಯೋಗದೊಂದಿಗೆ ಕಾಲೇಜು ಆವರಣದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಮೂಡುಬಿದಿರೆ ಪುರಸಭೆಯ ಪರಿಸರ ಅಭಿಯಂತರೆ ಶಿಲ್ಪಾ ಎಸ್. ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ಪರಿಸರ ಸಂರಕ್ಷಣೆ ಮತ್ತು ತ್ಯಾಜ್ಯ ನಿರ್ವಹಣೆಯ ಮೂಲಕ ಸುಸ್ಥಿರ ಭವಿಷ್ಯವನ್ನು ನಿರ್ಮಿಸುವುದು ಎಂಬ ವಿಷಯದ ಕುರಿತು ಮಾತನಾಡಿದರು. ಪರಿಸರ ನಾಶವನ್ನು ಕಡಿಮೆ ಮಾಡಲು ವಿದ್ಯಾರ್ಥಿಗಳು ತಮ್ಮ ದೈನಂದಿನ ಜೀವನದಲ್ಲಿ ತ್ಯಾಜ್ಯದ ಪ್ರಮಾಣವನ್ನು ಕಡಿಮೆ ಮಾಡಬೇಕು ಮತ್ತು ಮರುಬಳಕೆಗೆ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು. ಹೆಚ್ಚುತ್ತಿರುವ ಪ್ಲಾಸ್ಟಿಕ್ ಬಳಕೆಯು ತ್ಯಾಜ್ಯ ಉತ್ಪಾದನೆಗೆ ನೇರವಾಗಿ ಕೊಡುಗೆ ನೀಡುತ್ತಿದೆ. ಆದ್ದರಿಂದ ಉತ್ಪನ್ನಗಳನ್ನು ಖರೀದಿಸುವಾಗ ಮತ್ತು ಬಳಸುವಾಗ ಪ್ರಜ್ಞಾಪೂರ್ವಕ ಆಯ್ಕೆಗಳನ್ನು ಮಾಡಬೇಕಿದೆ ಎಂದು ತಿಳಿಸಿದ ಅವರು, ಏಕ-ಬಳಕೆಯ ಪ್ಲಾಸ್ಟಿಕ್ ಉಂಟುಮಾಡಿರುವ ಗಂಭೀರ ಸಮಸ್ಯೆಗಳನ್ನು ವಿವರಿಸಿದರು.

ಪ್ರಾಂಶುಪಾಲ ಡಾ. ಪ್ರಶಾಂತ್ ಸಿ.ಎಂ. ಮಾತನಾಡಿ, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯದಿಂದಾಗಿ ಮುಚ್ಚಿಹೋಗುತ್ತಿರುವ ಒಳಚರಂಡಿ ವ್ಯವಸ್ಥೆಗಳು ಮಳೆಗಾಲದಲ್ಲಿ ಕೃತಕ ಪ್ರವಾಹಕ್ಕೆ ಕಾರಣವಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು. ಉಪ ವಲಯ ಅರಣ್ಯ ಅಧಿಕಾರಿ ರಾಘವೇಂದ್ರ ಶೆಟ್ಟಿ ಮತ್ತು ಗಸ್ತು ಅರಣ್ಯ ಪಾಲಕ ಸಂದೇಶ್ ಮಾತನಾಡಿ, ಪರಿಸರ ಸಮತೋಲನ ಮತ್ತು ಪರಿಸರ ಸುಸ್ಥಿರತೆಗಾಗಿ ಸಸಿಗಳನ್ನು ನೆಡುವುದರ ಮಹತ್ವವನ್ನು ವಿವರಿಸಿದರು. ಇದೇ ಸಂದರ್ಭದಲ್ಲಿ ಕಾಲೇಜು ಕ್ಯಾಂಪಸ್ಸಿನಲ್ಲಿ ಸಸಿ ನೆಡುವ ಅಭಿಯಾನವನ್ನು ನಡೆಸಲಾಯಿತು.

ಎನ್ ಸಿಸಿ ಕೆಡೆಟ್‌ಗಳು, ಎನ್.ಎಸ್.ಎಸ್. ಸ್ವಯಂಸೇವಕರು, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಸಸಿಗಳನ್ನು ನೆಡುವಲ್ಲಿ ಉತ್ಸಾಹದಿಂದ ಭಾಗವಹಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಸಂಘಟಕರು ನೆರೆದಿದ್ದ ಎಲ್ಲರನ್ನೂ ವಂದಿಸಿದರು.