ಮೂಡುಬಿದಿರೆ: ವಿದ್ಯಾರ್ಥಿಗಳು ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತರಾಗಿ ಆರೋಗ್ಯವಂತ ಹಾಗೂ ಜವಾಬ್ದಾರಿಯುತ ಸಮಾಜ ನಿರ್ಮಾಣದಲ್ಲಿ ಸಕ್ರಿಯ ಪಾತ್ರ ವಹಿಸಬೇಕು ಎಂದು ಮೂಡುಬಿದಿರೆ ಆರಕ್ಷಕ ಠಾಣೆಯ ಪೊಲೀಸ್ ಉಪನಿರೀಕ್ಷಕಿ ಪ್ರತಿಭಾ ಕೆ.ಎಸ್. ಹೇಳಿದರು.

ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಮಾದಕ ವ್ಯಸನವು ವ್ಯಕ್ತಿಯ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಬದುಕಿನ ಮೇಲೆ ಗಂಭೀರ ದುಷ್ಪರಿಣಾಮ ಉಂಟುಮಾಡುತ್ತದೆ ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲ ಪುಷ್ಪರಾಜ್ ಅಧ್ಯಕ್ಷತೆವಹಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಮತ್ತು ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಬದ್ಧರಾಗಿ ಕಾರ್ಯನಿರ್ವಹಿಸುವ ಪ್ರತಿಜ್ಞಾವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲಾಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ಪ್ರತಿಜ್ಞೆ ಸ್ವೀಕರಿಸಿ ಮಾದಕ ವ್ಯಸನದ ವಿರುದ್ಧ ಜಾಗೃತಿ ಮೂಡಿಸುವ ಸಂಕಲ್ಪ ಮಾಡಿದರು. ಕಾರ್ಯಕ್ರಮದಲ್ಲಿ ಸಿಇಟಿ ಸಂಯೋಜಕ ರಂಜಿತ್ ಜೈನ್, ಜೀವಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾಕ್ಟರ್ ಶೃತಿ ಉಪಸ್ಥಿತರಿದ್ದರು. ಉಪಪ್ರಾಂಶುಪಾಲ ಸುನಾದರಾಜ್ ಜೈನ್ ಕಾರ್ಯಕ್ರಮ ನಿರೂಪಿಸಿದರು.