ಮೂಡುಬಿದಿರೆ: ರಾಷ್ಟ್ರೀಯ ಮಾದಕವಸ್ತು ವಿರೋಧಿ ದಿನದ ಅಂಗವಾಗಿ ಆಳ್ವಾಸ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಮಾದಕ ವ್ಯಸನ ವಿರೋಧಿ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಮಾನವ ಸರಪಳಿ ನಿರ್ಮಿಸಿ, ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ಮಾದಕ ವಸ್ತುಗಳಿಂದ ದೂರವಿದ್ದು ಆರೋಗ್ಯಕರ, ಶಿಸ್ತಿನ ಹಾಗೂ ಜವಾಬ್ದಾರಿಯುತ ಜೀವನವನ್ನು ನಡೆಸುವ ಸಂಕಲ್ಪವನ್ನು ವಿದ್ಯಾರ್ಥಿಗಳು ಕೈಗೊಂಡರು. ಸಮಾಜದಲ್ಲಿ ಮಾದಕ ವ್ಯಸನದ ವಿರುದ್ಧ ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಹೊಣೆಗಾರಿಕೆ ಎಂಬ ಸಂದೇಶವನ್ನು ಕಾರ್ಯಕ್ರಮದ ಮೂಲಕ ಸಾರಲಾಯಿತು.

ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಲೋಕೇಶ್ ಮಾತನಾಡಿ, ಮಾದಕ ವ್ಯಸನವು ವ್ಯಕ್ತಿಯ ಆರೋಗ್ಯ, ಕುಟುಂಬ ಹಾಗೂ ಸಮಾಜದ ಮೇಲೆ ದುಷ್ಪರಿಣಾಮ ಬೀರುವ ಸಾಮಾಜಿಕ ಪಿಡುಗಾಗಿದೆ. ಯುವಜನತೆ ಈ ದುಶ್ಚಟದಿಂದ ದೂರವಿರುವ ಮೂಲಕ ರಾಷ್ಟ್ರದ ಸದೃಢ ಭವಿಷ್ಯ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಹೇಳಿದರು.

ಕಾಲೇಜಿನ ಉಪನ್ಯಾಸಕರು, ವಾರ್ಡನ್‌ಗಳು ಹಾಗೂ ನೂರಾರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.