ಮೂಡುಬಿದಿರೆ: ಸಹಕಾರ ಕ್ಷೇತ್ರದ ಮೂಲಕ ಸಾಮಾಜಿಕ ಸೇವೆ ಸಲ್ಲಿಸುತ್ತಿರುವ ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅವರಿಗೆ ಕಣಚೂರು ಇಸ್ಲಾಮಿಕ್ ಎಜುಕೇಶನ್ ಟ್ರಸ್ಟ್ ವತಿಯಿಂದ ‘ವಿಶಿಷ್ಟ ಸೇವಾ ಪ್ರಶಸ್ತಿ’ ಪ್ರದಾನ ಮಾಡಲಾಯಿತು.

ನಾಟೆಕಲ್‌ನ ಕಣಚೂರು ಸಭಾಂಗಣದಲ್ಲಿ ಸೋಮವಾರ ನಡೆದ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮವು ಕಣಚೂರು ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯು. ಕಣಚೂರು ಮೋನು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಹಕಾರ ಕ್ಷೇತ್ರದ ಮೂಲಕ ಸಾಮಾಜಿಕ ಧ್ಯೇಯದೊಂದಿಗೆ 112ಕ್ಕೂ ಅಧಿಕ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಸಮಾಜಮುಖಿ ಸೇವೆ ಸಲ್ಲಿಸಿರುವುದನ್ನು ಪರಿಗಣಿಸಿ ಕರ್ನಾಟಕ ಸರ್ಕಾರದ ನೌಕರರ ರಾಜ್ಯ ವಿಮೆ (ಇಎಸ್‌ಐ) ವೈದ್ಯಕೀಯ ಸೇವೆಗಳ ಆಯುಕ್ತ ದಿನೇಶ್ ಕುಮಾರ್ ವೈ.ಕೆ. ಅವರು, ಕಣಚೂರು ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಸಲಹಾ ಸಮಿತಿ ಚೇರ್ಮನ್ ಹಾಗೂ ಕಣ್ಣೂರು ಮತ್ತು ಕ್ಯಾಲಿಕಟ್ ವಿಶ್ವವಿದ್ಯಾಲಯಗಳ ವಿಶ್ರಾಂತ ಕುಲಪತಿ ಎಂ. ಅಬ್ದುಲ್ ರಹಿಮಾನ್ ಅವರ ಗೌರವ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.

ಕಣಚೂರು ಇಸ್ಲಾಮಿಕ್ ಎಜುಕೇಶನ್ ಟ್ರಸ್ಟ್ ನಿರ್ದೇಶಕ ಅಬ್ದುಲ್ ರಹಿಮಾನ್, ಟ್ರಸ್ಟಿಗಳಾದ ಸಾಹದಾ ರಹಿಮಾನ್, ಉಮಯಾ ಬಾನು ಆರಿಫ್, ಫರೀದಾ ನಸೀರ್, ಅಬಿದಾ ಹಾಶಿಂ, ಕಣಚೂರು ಹೆಲ್ತ್ ಸೈನ್ಸಸ್ ಸಲಹಾ ಮಂಡಳಿ ಹಾಗೂ ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ ಅಧ್ಯಕ್ಷ ಮೊಹಮ್ಮದ್ ಇಸ್ಮಾಯಿಲ್ ಹೆಜಮಾಡಿ, ಸಲಹಾ ಮಂಡಳಿ ಸದಸ್ಯ ಎಂ. ವೆಂಕಟರಾಯ ಪ್ರಭು, ಮುಖ್ಯ ಆಡಳಿತಾಧಿಕಾರಿ ರೋಹನ್ ಎಸ್. ಮೊನಿಸ್ ಉಪಸ್ಥಿತರಿದ್ದರು.

ಚಿತ್ತರಂಜನ್ ಬೋಳಾರ್ ಸಹಕಾರ ಕ್ಷೇತ್ರದ ಜೊತೆಗೆ ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿಯೂ ಸೇವೆ ಸಲ್ಲಿಸಿದ್ದು, ಸಹಕಾರ ರತ್ನ ಪ್ರಶಸ್ತಿ, ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ರಾಷ್ಟ್ರೀಯ ಬಸವಶ್ರೀ ಪ್ರಶಸ್ತಿ, ಸಮಾಜ ರತ್ನ ಪ್ರಶಸ್ತಿ, ಸಜ್ಜನ–ಚಂದನ ಸದ್ಭಾವನಾ ರಾಜ್ಯ ಪ್ರಶಸ್ತಿ, ಪರಿವರ್ತನಶ್ರೀ ರಾಜ್ಯ ಪ್ರಶಸ್ತಿ, ಭಾರತ ರತ್ನ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ರಾಷ್ಟ್ರೀಯ ಪ್ರಶಸ್ತಿ, ಐಐಬಿ ಬೆಸ್ಟ್ ಬಿಸಿನೆಸ್ ಲೀಡರ್‌ಶಿಪ್ ಅವಾರ್ಡ್–2023, ತೌಳವ ಸಹಕಾರಿ ಮಾಣಿಕ್ಯ ಹಾಗೂ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳಿಗೆ ಭಾಜನರಾಗಿದ್ದಾರೆ. ವಿವಿಧ ಸಹಕಾರ ಸಂಘಗಳು ಹಾಗೂ ಸಂಸ್ಥೆಗಳೂ ಅವರನ್ನು ಸನ್ಮಾನಿಸಿವೆ.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷರಾಗಿರುವ ಚಿತ್ತರಂಜನ್ ಬೋಳಾರ್ ಮೂರನೇ ಬಾರಿ ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ಆಡಳಿತ ಮಂಡಳಿಗೆ ಮೈಸೂರು ವಿಭಾಗದ ಕರಾವಳಿ ಕ್ಷೇತ್ರದಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ ಪ್ರಥಮ ಬಾರಿಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೆಬಲ್ ಟ್ರಸ್ಟ್ ಟ್ರಸ್ಟಿ, ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆ ಆಡಳಿತ ಮಂಡಳಿ ಸದಸ್ಯ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಗಟು ಮಾರಾಟ ಸಹಕಾರ ಸಂಘದ ಮಾಜಿ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಅವರ ನೇತೃತ್ವದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಿದ್ದು, ಸಂಘದ ಶೇ.95ರಷ್ಟು ಸಿಬ್ಬಂದಿ ಮಹಿಳೆಯರಾಗಿದ್ದಾರೆ. ಸಿಬ್ಬಂದಿಯಲ್ಲಿ ಶೇ.100ರಷ್ಟು ಹಿಂದುಳಿದ ವರ್ಗದವರು ಹಾಗೂ ಶೇ.60ರಷ್ಟು ಏಕಪೋಷಕ ಕುಟುಂಬದ ಮಹಿಳೆಯರಿಗೆ ಉದ್ಯೋಗ ನೀಡಲಾಗಿದೆ. ಸಂಘದ ಮೂಲಕ 112ಕ್ಕೂ ಅಧಿಕ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿ 950ಕ್ಕೂ ಹೆಚ್ಚು ಮಂದಿಗೆ ಕಣ್ಣಿನ ಕ್ಯಾಟರಾಕ್ಟ್ ಚಿಕಿತ್ಸೆ, ಉಚಿತ ಔಷಧಿ, ಶಸ್ತ್ರಚಿಕಿತ್ಸೆ ನೆರವು ಹಾಗೂ 21 ಸಾವಿರಕ್ಕೂ ಹೆಚ್ಚು ಕನ್ನಡಕಗಳನ್ನು ವಿತರಿಸಲಾಗಿದೆ. ಬಡ ಕುಟುಂಬಗಳಿಗೆ ಉಚಿತ ಆರೋಗ್ಯ ಕಾರ್ಡ್ ವಿತರಿಸುವುದು, ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ದಾಖಲಾತಿ ಮತ್ತು ಪರೀಕ್ಷಾ ಶುಲ್ಕ ಪಾವತಿಸುವುದು, ವಿದ್ಯಾರ್ಥಿವೇತನ ನೀಡುವುದು, ಕಳೆದ 12 ವರ್ಷಗಳಿಂದ ಉಚಿತ ಪ್ರೇರಣಾ ಶಿಬಿರಗಳನ್ನು ನಡೆಸಿ ಸುಮಾರು 100 ಬಡ ವಿದ್ಯಾರ್ಥಿಗಳಿಗೆ ಐಎಎಸ್, ಕೆಎಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ನೀಡುವುದು ಹಾಗೂ ಸರ್ಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಮಾದರಿ ಪ್ರಶ್ನೋತ್ತರಗಳನ್ನು ದಿನಪತ್ರಿಕೆಗಳ ಸಹಯೋಗದಲ್ಲಿ ವಿತರಿಸುವ ಕಾರ್ಯವನ್ನು ಸಂಘ ನಿರಂತರವಾಗಿ ನಡೆಸುತ್ತಿದೆ.

ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ ಡೀನ್ ಶಹನವಾಝ್ ಮಣಿಪಾಡಿ ಸ್ವಾಗತಿಸಿದರು. ಕಣಚೂರು ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲೆ ವಿದ್ಯಾಪ್ರಭಾ ಆರ್ ವಂದಿಸಿದರು.