ಮೂಡುಬಿದಿರೆ: ಯಕ್ಷದೇವ ಮಿತ್ರ ಕಲಾ ಮಂಡಳಿಯ 29ನೇ ವರ್ಷದ ಯಕ್ಷ ಕಾರ್ಯಕ್ರಮ ಜು. 17ರಂದು ಮೂಡುಬಿದಿರೆಯ ಪ್ರೀತಮ್ ಗಾರ್ಡನ್ ಸಭಾಭವನದಲ್ಲಿ ನಡೆಯಿತು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಎಂ. ಮೋಹನ ಆಳ್ವ ಅವರ ಉಪಸ್ಥಿತಿಯಲ್ಲಿ, ಮಂಡಳಿಯ ಗೌರವಾಧ್ಯಕ್ಷ ಕೆ. ಶ್ರೀಪತಿ ಭಟ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಿಶ್ರಾಂತ ಯಕ್ಷಗಾನ ಕಲಾವಿದ ಕೆ. ಎಚ್. ದಾಸಪ್ಪ ರೈ ಅವರಿಗೆ 2026ನೇ ಸಾಲಿನ ಯಕ್ಷದೇವ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಎಡನೀರು ಮಠದ ಸಚ್ಚಿದಾನಂದ ಭಾರತಿ ಸ್ವಾಮೀಜಿ ಮಾತನಾಡಿ, ಯಕ್ಷಗಾನವು ಸಂಸ್ಕಾರ ನೀಡುವ ಕಲೆಯಾಗಿದ್ದು, ಇಂತಹ ಕಲಾ ಮಾಧ್ಯಮಗಳು ಹಾದಿ ತಪ್ಪುತ್ತಿರುವ ಸಮಾಜವನ್ನು ಸರಿದಾರಿಗೆ ತರಲು ಪೂರಕವಾಗಿವೆ ಎಂದರು. ಮಕ್ಕಳಲ್ಲಿ ಯಕ್ಷಗಾನದ ಬಗ್ಗೆ ಆಸಕ್ತಿ ಬೆಳೆಸುವ ಕಾರ್ಯ ನಿರಂತರವಾಗಿ ನಡೆಯಬೇಕೆಂದು ಹೇಳಿದರು. ಕರ್ನಾಟಕ ಬ್ಯಾಂಕ್ ಲಿ. ಮಹಾಪ್ರಬಂಧಕ ನಾಗರಾಜ ಉಪಾಧ್ಯಾಯ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕ ಅನಂತ ಪದ್ಮನಾಭ ಆಸ್ರಣ್ಣ ಮಾತನಾಡಿ, ಧರ್ಮದ ಅರಿವು ಮೂಡಿಸಲು ಯಕ್ಷಗಾನ ಉತ್ತಮ ಮಾಧ್ಯಮ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸುದರ್ಶನ ಎಂ., ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಹಾಗೂ ದಕ್ಷಿಣ ಕನ್ನಡ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ ಶುಭ ಹಾರೈಸಿದರು. ಮಂಡಳಿಯ ಸ್ಥಾಪಕ ಅಧ್ಯಕ್ಷ ಎಂ. ದೇವಾನಂದ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಂಡಳಿಯ ಉಪಾಧ್ಯಕ್ಷ ಬೊಕ್ಕಸ ಚಂದ್ರಶೇಖರ ರಾವ್, ಕಾರ್ಯದರ್ಶಿ ರವಿಪ್ರಸಾದ್ ಕೆ. ಶೆಟ್ಟಿ ಉಪಸ್ಥಿತರಿದ್ದರು.
ನಂದಳಿಕೆ ಸುಬ್ರಹ್ಮಣ್ಯ ಬೈಪಡಿತ್ತಾಯ ಸನ್ಮಾನ ಪತ್ರ ವಾಚಿಸಿದರು. ವೀಣಾ ಡಿ. ಭಟ್ ಮತ್ತು ಭಾಗ್ಯಲಕ್ಷ್ಮಿ ಸುರೇಶ್ ಚಂದ್ರ ಪ್ರಾರ್ಥಿಸಿದರು. ನೆಲ್ಲಿಮಾರು ಸದಾಶಿವರಾವ್ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮಕ್ಕೂ ಮುನ್ನ ನಂದಳಿಕೆ ಸುಬ್ರಹ್ಮಣ್ಯ ಬೈಪಡಿತ್ತಾಯ ಸಾರಥ್ಯದಲ್ಲಿ 'ಕರ್ಣಾವಸಾನ' ಯಕ್ಷಗಾನ ತಾಳಮದ್ದಳೆ ನಡೆಯಿತು. ಬಳಿಕ ಹಾಲಾಡಿ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯಿಂದ 'ಪಂಜರ ಪಕ್ಷಿ' ಯಕ್ಷಗಾನ ಪ್ರದರ್ಶನ ನಡೆಯಿತು.