ಮೂಡುಬಿದಿರೆ: ಭಾರತ ಸರ್ಕಾರದ ಜ್ಞಾನ ಭಾರತಂ ಮಿಷನ್ ಅಡಿಯಲ್ಲಿ ಹಸ್ತಪ್ರತಿಗಳ ಸಮೀಕ್ಷೆ ಕಾರ್ಯಕ್ರಮದ ಅಂಗವಾಗಿ, ಪ್ರಾಚೀನ ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ ಕಾರ್ಯಕ್ಕೆ ಮೂಡುಬಿದಿರೆಯಲ್ಲಿ ಶನಿವಾರ ಚಾಲನೆ ನೀಡಲಾಯಿತು.

ಭಾರತ ಸರ್ಕಾರದ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಜ್ಞಾನ ಭಾರತಂ ಮಿಷನ್ ಅಡಿಯಲ್ಲಿ ಕರ್ನಾಟಕದ ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆಯನ್ನು 2026ರ ಮಾರ್ಚ್‌ನಿಂದ ಮೇ ತಿಂಗಳವರೆಗೆ ನಡೆಸಿತ್ತು. ಇದರ ಮುಂದುವರಿದ ಭಾಗವಾಗಿ ದಕ್ಷಿಣ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಸ್ವಾಮೀಜಿ ಸಮೀಕ್ಷೆ ಹಾಗೂ ಡಿಜಿಟಲೀಕರಣ ಕಾರ್ಯಕ್ಕೆ ಚಾಲನೆ ನೀಡಿದರು. ಜಿಲ್ಲಾ ಉಸ್ತುವಾರಿ ಅಧಿಕಾರಿ ಡಾ. ಜಿ.ವಿ. ಕಲ್ಲಾಪುರ, ಡಾ. ವೆಂಕಟೇಶ್ ಎಂ. ಗಿರಿ, ಡಾ. ಕೆ.ಎಸ್.ಎನ್. ಉಡುಪ ಹಾಗೂ ಶ್ರವಣ ಮಠದ ವ್ಯವಸ್ಥಾಪಕ ಸಂಜಯಂತ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ, ಜಿಲ್ಲೆಯ ಸಾರ್ವಜನಿಕರು ತಮ್ಮ ಬಳಿ ಇರುವ ಪ್ರಾಚೀನ ಗ್ರಂಥಗಳನ್ನು ಸಮೀಕ್ಷೆಗೆ ಒದಗಿಸುವ ಮೂಲಕ ಅವುಗಳ ಸಂರಕ್ಷಣೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು. ಬಳಿಕ ಶ್ರೀಮಠ ಹಾಗೂ ರಮಾ ರಾಣಿ ಶೋಧ ಸಂಸ್ಥಾನದ ಸಂಗ್ರಹದಲ್ಲಿರುವ ತಾಳೆಓಲೆ ಹಸ್ತಪ್ರತಿಗಳ ಸಮೀಕ್ಷೆ ನಡೆಸಲಾಯಿತು.